ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ, ಸಹಕಾರಿ ಕ್ಷೇತ್ರದ ಧುರೀಣ ಹಾಗೂ ಡಿಸಿಸಿ ಬ್ಯಾಂಕ್ನ ಮಾಜಿ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ನೇಮಕಗೊಳಿಸುವಂತೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ.
ಸುಮಾರು ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರು ಪಕ್ಷದ ಸಿದ್ಧಾಂತ, ಸಂಘಟನೆ ಹಾಗೂ ಕಾರ್ಯಕರ್ತರ ಹಿತಾಸಕ್ತಿಗಾಗಿ ನಿರಂತರವಾಗಿ ದುಡಿಯುತ್ತಿದ್ದಾರೆ. ಪಕ್ಷದ ಪರವಾಗಿ ಮಾಧ್ಯಮ ಚರ್ಚೆಗಳು ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ನಿರ್ಭೀತಿಯಾಗಿ ಧ್ವನಿ ಎತ್ತಿದ ನಾಯಕರಾಗಿದ್ದು, ಯುವ ಕಾರ್ಯಕರ್ತರೊಂದಿಗೆ ಉತ್ತಮ ಒಡನಾಟ ಹೊಂದಿದ್ದಾರೆ ಎಂದು ಅವರು ಹೇಳಿದ್ದಾರೆ.
2024ರ ಏಪ್ರಿಲ್ನಲ್ಲಿ ಅಂದಿನ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಕಿಶನ್ ಹೆಗ್ಡೆ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದರು. ಆದರೆ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹಾಗೂ ಕಿಶನ್ ಹೆಗ್ಡೆ ಒಂದೇ ಸಮುದಾಯದವರಾಗಿದ್ದ ಕಾರಣ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಚುನಾವಣೆಯ ಬಳಿಕ ಆದೇಶ ಜಾರಿಯಾಗುವುದಾಗಿ ಭರವಸೆ ನೀಡಲಾಗಿದ್ದರೂ, ಇದುವರೆಗೆ ಅದು ಈಡೇರಿಲ್ಲ ಎಂದು ಅವರು ತಿಳಿಸಿದ್ದಾರೆ.
ಆದರೂ ಕಿಶನ್ ಹೆಗ್ಡೆ ಅವರು ಯಾವುದೇ ಅಸಮಾಧಾನ ವ್ಯಕ್ತಪಡಿಸದೆ ಪಕ್ಷದ ಶಿಸ್ತು ಪಾಲಿಸಿಕೊಂಡು ಸಂಘಟನಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇಂತಹ ನಿಷ್ಠಾವಂತ ಹಾಗೂ ಅನುಭವಿ ನಾಯಕರಿಗೆ ನ್ಯಾಯ ಒದಗಿಸುವ ಸಮಯ ಈಗ ಬಂದಿದೆ ಎಂದು ಅಜಿತ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಹಾಗೂ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಲು ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರಂತಹ ಸಂಘಟನಾ ಸಾಮರ್ಥ್ಯವುಳ್ಳ ನಾಯಕನ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಹಾಗೂ ಕೆಪಿಸಿಸಿ ನಾಯಕತ್ವವು ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ಅವಧಿಗೆ ನೇಮಕಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions