Advertisement

ಹೀಟ್ ವೇವ್” ನಿಂದ ಸಾರ್ವಜನಿಕರು ರಕ್ಷಿಸಿಕೊಳ್ಳಲು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಲಹೆ-ಸೂಚನೆಗಳು

ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಬೇಸಿಗೆ ಕಾಲದ (ಮಾರ್ಚ್ನಿಂದ ಮೇ ವರೆಗೆ) ತಾಪಮಾನದ ಅವಧಿಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆ ಇದ್ದು, ಕರಾವಳಿ ಕರ್ನಾಟಕದ ಬಹುತೇಕ ಭಾಗಗಳಲ್ಲಿಯೂ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇದು ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇರುವ ಹಿನ್ನೆಲೆ, ತೀವ್ರ ತಾಪಮಾನದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಶಾಖಾಘಾತ (ಹೀಟ್ ಸ್ಟ್ರೋಕ್)ವನ್ನು ತಡೆಗಟ್ಟಲು ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಕಂಡ ಸಲಹೆ /ಸೂಚನೆಗಳನ್ನು ನೀಡಿದೆ.

ಅತೀ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಾದ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು.

ಹೊರಗಿನ ಉಷ್ಣತೆಯು ಹೆಚ್ಚಿರುವಾಗ ಅಂದರೆ ಮಧ್ಯಾಹ್ನ 12 ರಿಂದ 3 ರ ವರೆಗೆ ಶ್ರಮದಾಯಕ ಚಟುವಟಿಕೆಗಳನ್ನು ಆದಷ್ಟು ತಪ್ಪಿಸಬೇಕು. ಪೂರ್ವಾಹ್ನ 11 ಗಂಟೆಯಿಂದ ಸಂಜೆ 4 ಗಂಟೆಯ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯಾಡುವ ವ್ಯವಸ್ಥೆ ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ಕಜೊಂಡೊಯ್ಯಬೇಕು.

ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು.

ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓ.ಆರ್.ಎಸ್ ಅನ್ನು ಬಳಸಬೇಕು. ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು, ತರಕಾರಿ, ಸೊಪ್ಪು, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು. ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆ, ಶಟರ್ ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು. ಹೊರಗೆ ತೆರಳುವಾಗ ನೀರಿನ ಬಾಟೆಲ್, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟೋಲೈಟ್, ಗ್ಲೂಕೋಸ್, ಓ.ಆರ್.ಎಸ್ ಅನ್ನು ಒಂಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯುವಂತೆ ನಾಗರಿಕರನ್ನು ಪ್ರೋತ್ಸಾಹಿಸಬೇಕು. ನಾಗರಿಕರು ಅತೀ ಹೆಚ್ಚು ತಾಪಮಾನ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

ಅತೀ ಹೆಚ್ಚು ತಾಪಮಾನದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳು ಹಾಗೂ ಗುರುತಿಸುವಿಕೆ: ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ಆರೋಗ್ಯದ ಮೇಲೆ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಮತ್ತು ಶಾಖದ ಆಘಾತದಂತಹ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಅತೀ ಹೆಚ್ಚು ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು. ನೀರು ಅಥವಾ ಪಿನರ್ಜಲೀಕರಣ ಪಾನೀಯಗಳಾದ ಓ.ಆರ್.ಎಸ್, ನಿಂಬೆ ಪಾನಕ ನೀಡಬೇಕು. ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡಲ್ಲಿ ಅಥವಾ ದೀರ್ಘಕಾಲದವರೆಗೆ ಇದ್ದಲ್ಲಿ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು. ಈ ಸಂದರ್ಭದಲ್ಲಿ ಮದ್ಯಪಾನ, ಕಾಫಿ, ಶೇಖರಿಸಿದ ಪಾನೀಯಗಳನ್ನು ನೀಡಬಾರದು. ಅತೀ ಹೆಚ್ಚು ತಾಪಮಾನದಿಂದ ಬಳಲಿಕೆಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿರಿಸಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು. ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸಬಹುದಾದದ ರೋಗಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಆಗಿಂದಾಗ್ಗೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪ್ರಕಟಣೆ ತಿಳಿಸಿದೆ.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions