Advertisement

ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪ : ಎಂ.ಎ. ಗಫೂರ್

ತಿಗಳ ಸಮುದಾಯದ ಆರಾಧ್ಯ ದೈವ್ಯರಾದ ಶ್ರೀ ಅಗ್ನಿಬನ್ನಿರಾಯರಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿದೀಪವಾಗುತ್ತವೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಳಿಕ ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಶ್ರಮ ಜೀವನಕ್ಕೆ ಹೆಸರಾದ ತಿಗಳ ಸಮುದಾಯವು ಅಗ್ನಿಬನ್ನಿರಾಯರನ್ನು ಸಮಾಜ ಸುಧಾರಕರಾಗಿ ಆರಾಧಿಸುತ್ತಿದೆ. 10ರಿಂದ 12ನೇ ಶತಮಾನದಲ್ಲಿ ಅನೇಕ ವಚನಕಾರರು, ದಾರ್ಶನಿಕರು ಹಾಗೂ ಸಮಾಜ ಸುಧಾರಕರು ಜನಿಸಿ ಸಮಾಜದಲ್ಲಿನ ಲೋಪದೋಷಗಳನ್ನು ತಿದ್ದಿ ಸಮಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಸತ್ಯದ ಮಾರ್ಗವನ್ನು ಪ್ರತಿಪಾದಿಸಿದ್ದ ಅಗ್ನಿಬನ್ನಿರಾಯರ ತತ್ತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶೋಷಣೆಯಿಲ್ಲದ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಅವರ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನವಾಗಬೇಕು ಎಂದರು. ಕೃಷಿ ಮತ್ತು ಕಲೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದ ತಿಗಳ ಸಮುದಾಯವು ಇನ್ನಷ್ಟು ಅಭಿವೃದ್ಧಿ ಹೊಂದಿ ಸಮಾಜದ ಮುಂಚೂಣಿಗೆ ಬರಬೇಕೆಂದು ಆಶಿಸಿದರು.

ಸಾಂಸ್ಕೃತಿಕ ಚಿಂತಕ ಡಾ. ಶ್ರೀಕಾಂತ್ ಸಿದ್ಧಾಪುರ ಉಪನ್ಯಾಸ ನೀಡಿ ಮಾತನಾಡಿ, ಅಗ್ನಿಬನ್ನಿರಾಯರ ಕುರಿತು ಜನಪದ ಹಾಗೂ ಪೌರಾಣಿಕ ಮೂಲಗಳಲ್ಲಿ ಹಲವು ಕಥೆಗಳು ದೊರೆಯುತ್ತವೆ ಎಂದರು. ಭಾಷಾವಾರು ಪ್ರಾಂತ್ಯ ರಚನೆಯ ಮುನ್ನ ತಿಗಳರು ರಾಜ್ಯರಕ್ಷಣೆಗಾಗಿ ಸೈನ್ಯದಲ್ಲಿ ಸೇವೆ ಸಲ್ಲಿಸಿ ತಮ್ಮ ಪ್ರಾಣವನ್ನೇ ಅರ್ಪಿಸಿದ್ದರೆಂಬುದು ಶಾಸನಗಳಿಂದ ತಿಳಿದುಬರುತ್ತದೆ ಎಂದು ಹೇಳಿದರು.

ತಿಗಳ ಸಮುದಾಯದವರು ಮುಖ್ಯವಾಗಿ ಬೆಂಗಳೂರು, ಮೈಸೂರು, ಮಂಡ್ಯ ಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರ ಅಭಿವೃದ್ಧಿಗಾಗಿ ಸರ್ಕಾರ ತಿಗಳ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ ಎಂದರು. ತೋಟಗಾರಿಕೆಯಲ್ಲಿ ನಿಪುಣರಾಗಿದ್ದ ತಿಗಳರು ಬೆಂಗಳೂರಿನ ಲಾಲ್‌ಬಾಗ್ ಉದ್ಯಾನವನ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿದ್ದು, ಅಲ್ಲಿನ ಕೈತೋಟಗಳು ವಿಶ್ವದ ಗಮನ ಸೆಳೆಯುತ್ತಿವೆ ಎಂದು ಹೇಳಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಮಾತನಾಡಿ, ವಿವಿಧ ಸಂತರ ಮತ್ತು ಚಿಂತಕರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶಗಳನ್ನು ಯುವಪೀಳಿಗೆಗೆ ತಲುಪಿಸಲಾಗುತ್ತಿದೆ. ಅವರ ಉದಾತ್ತ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದಲೇ ಜಯಂತಿ ಆಚರಣೆಗಳಿಗೆ ಸಾರ್ಥಕತೆ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ನವನೀತ್, ಜಿಲ್ಲಾಡಳಿತದ ಸಿಬ್ಬಂದಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ರಾಮಾಂಜಿ ವಂದಿಸಿದರು.

KannadaExpress

Advertisement

ವಾರ್ತಾಪತ್ರಿಕೆ ಚಂದಾದಾರಿಕೆ

ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ

ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲ
Get In Touch

Editor Kannada Express 1st Floor, Raaj Towers Udupi - 576101

+919008424891

Kannadaexpress@gmail.com

Follow Us
Advertisements

© 2025 KannadaExpress. All Rights Reserved.
Design by GreyCrust Solutions